ಮೈಸೂರು: ಮೈಸೂರು ನಗರದಲ್ಲಿ ಇಂದು ಸುರಿದ ಮಳೆಯಿಂದ ನಗರ ಪ್ರದೇಶ ಸೇರಿದಂತೆ ಹಲವಾರು ರಸ್ತೆ ಸಂಪೂರ್ಣ ಜಲಾವೃತಗೊಂಡಿದ್ದು, ವಾಹನ ಸವಾರರು ಪರದಾಟ ನಡೆಸುತ್ತಿದ್ದಾರೆ.
ಶ್ರೀರಂಗಪಟ್ಟಣಕ್ಕೆ ತೆರಳುವ ಸಿದ್ದಲಿಂಗಪುರ ರಸ್ತೆಯ ಸರ್ವೀಸ್ ಸಂಪೂರ್ಣ ನೀರು ನಿಂತು ವಾಹನ ಚಾಲಕಾರು ಪರದಾಡುವ ಸ್ಥಿತಿ ನಿರ್ಮಾಣವಾಗಿದ್ದು, ನಿಂತು ಸರತಿಯಲ್ಲಿ ವಾಹನಗಳು ಚಲಿಸುತ್ತಿದ್ದು, ವಾಹನ ದಟ್ಟಣೆ ಸಹ ಉಂಟಾಗಿದೆ. ಇತ್ತ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಹ ಇನ್ನೂ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಧಾರಕಾರ ಮಳೆ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಸಂಜೆ ಗುಡುಗು ಸಿಡಿಲಿನಿಂದ ಕೂಡಿದ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ.
ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ ವೇಳೆ ಕೋರಮಂಗಲ, ಮಡಿವಾಳ, ಶಾಂತಿನಗರ, ಬಸವನಗುಡಿ, ಚಾಮರಾಜಪೇಟೆ, ಎಂ.ಜಿ.ರಸ್ತೆ, ಇಂದಿರಾನಗರ, ಶಿವಾಜಿನಗರ, ಹಲಸೂರು ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆ ಜೋರಾಗಿ ಸುರಿಯಿತು.
ಈ ಪ್ರದೇಶಗಳ ರಸ್ತೆಯಲ್ಲೆಲ್ಲ ನೀರು ಹರಿಯಿತು. ರಾಜಕಾಲುವೆ ಹಾಗೂ ಚರಂಡಿಯ ತ್ಯಾಜ್ಯ ರಸ್ತೆಗೆ ಬಂದಿತ್ತು. ಇನ್ನೂ, ಮಳೆ ನೀರು ರಸ್ತೆಯಲ್ಲಿ ಹರಿದಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು.
ಶಿವಾನಂದ ವೃತ್ತ, ಮೆಜೆಸ್ಟಿಕ್ ಬಳಿಯ ರೈಲ್ವೆ ಕೆಳ ಸೇತುವೆಯಲ್ಲೂ ನೀರು ನಿಂತುಕೊಂಡಿತ್ತು. ಈ ರಸ್ತೆಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಸಾಗಿದವು.
ಹೊಸೂರು ರಸ್ತೆ, ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕನಕಪುರ ರಸ್ತೆಯಲ್ಲೂ ಮಳೆ ಜೋರಾಗಿತ್ತು. ಅಲ್ಲೆಲ್ಲ ವಾಹನಗಳ ದಟ್ಟಣೆ ಸಾಮಾನ್ಯವಾಗಿತ್ತು.
ಒಟ್ಟಾರೆ ದಿಢೀರ್ ಮಳೆಯಬ್ಬರಕ್ಕೆ ರಾಜಧಾನಿ ಜನರಿಗೆ ದಂಗು ಬಡಿದಂತಾಗಿದೆ. ಇನ್ಬೇರಡು ದಿನದವರೆಗೂ ಮಳೆಯಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.