ಕುಪ್ಪಣ್ಣ ಉದ್ಯಾನವನದಲ್ಲಿ ಮೇ 26ರಿಂದ ಮಾವು ಮೇಳ
ಮೈಸೂರು: ಹಣ್ಣುಗಳ ರಾಜ ಮಾವು ಈಗಾಗಲೇ ಹೂ ಬಿಟ್ಟು ಕಾಯಿ ಕಚ್ಚಿರುವ ಹೊತ್ತಿನಲ್ಲಿ ಮೈಸೂರಿನಲ್ಲಿ ಮಾವು ಮೇಳ ನಡೆಸಲು ಜಿಲ್ಲಾಡಳಿತದ ಸಹಯೋಗದೊಂದಿಗೆ ತೋಟಗಾರಿಕೆ ಇಲಾಖೆ ಮೇ 26 ರಿಂದ 28ರವರೆಗೆ `ಮಾವು ಮತ್ತು ಹಲಸು’ ಸಿಹಿ ಉಣ ಬಡಿಸಲಿದೆ.
ತೋಟಗಾರಿಕೆ ಇಲಾಖೆ ವತಿಯಿಂದ ನಗರದ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ಮೇ 26 ರಿಂದ 28ರವರೆಗೆ `ಮಾವು ಮತ್ತು ಹಲಸು’ ಮೇಳ ಆಯೋಜಿಸಲಾಗಿದೆ. 3 ದಿನಗಳ ಕಾಲ ನಡೆಯಲಿರುವ ಮೇಳದಲ್ಲಿ ವಿವಿಧ ಸ್ವಾದದ ಮಾವು, ಹಲಸು ಮೈಸೂರಿಗರಿಗೆ ಲಭ್ಯವಾಗಲಿದೆ.
ಮಾವಿನ ಹಣ್ಣು ಈಗಾಗಲೇ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದು, ಹಲಸಿನ ಘಮಲು ಕೂಡ ಸೂಸತೊಡಗಿದೆ. ಮಧ್ಯವರ್ತಿಗಳ ಹಾವಳಿ ತಪ್ಪಿಸಿ ಈ ಹಣ್ಣುಗಳ ಬೆಳೆಗಾರರಿಗೆ ಉತ್ತಮ ದರ ದೊರಕುವಂತೆ ಮಾಡುವುದು, ಗ್ರಾಹಕರು ನ್ಯಾಯಯುತ ಬೆಲೆಯಲ್ಲಿ ಹಣ್ಣುಗಳನ್ನು ಖರೀದಿಸಲು ಉತ್ತೇಜನ ನೀಡುವುದು ಹಾಗೂ ಸ್ಥಳೀಯ ಮಾವಿನ ಬಗೆಗೆ ಹೆಚ್ಚಿನ ಪ್ರಚಾರ ಮಾಡುವ ಉದ್ದೇಶದಿಂದ ಕಳೆದ 10 ವರ್ಷಳಿಂದಲೂ ತೋಟಗಾರಿಕೆ ಇಲಾಖೆ ಮಾವು ಮತ್ತು ಹಲಸು ಮೇಳ ಏರ್ಪಡಿಸುತ್ತಿದೆ.
ಅದರಂತೆ ಈ ಬಾರಿಯೂ ಮೇ26 ರಂದು ಬೆಳಗ್ಗೆ 11 ಗಂಟೆಗೆ ಶಾಸಕ ಕೆ.ಹರೀಶ್ ಗೌಡ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ತೋಟಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಮೂರು ದಿನಗಳ ಕಾಲ ಬೆಳಗ್ಗೆ 10 ರಿಂದ ಸಂಜೆ 5.30ರ ವರೆಗೆ ಮೇಳದಲ್ಲಿ ಸಾರ್ವಜನಿಕರು ಭಾಗಿಯಾಗಬಹುದಾಗಿದೆ.
ಪೂರ್ವ ಸಿದ್ಧತೆ:
ಮೇಳ ಆಯೋಜನೆಗೆ ತೋಟಗಾರಿಕೆ ಇಲಾಖೆ ನಗರದ ಕುಪ್ಪಣ್ಣ ಪಾರ್ಕ್ ಆವರಣದಲ್ಲಿ ಸಕಲ ಸಿದ್ಧತೆ ಮಾಡಿಕೊಂಡಿವೆ. ಈ ಸಂಬಂಧ ಈಗಾಗಳೆ ಎರಡ ಬಾರಿ ರೈತರೊಂದಿಗೆ ಸಭೆ ನಡೆಸಿ ಚರ್ಚೆ ನಡೆಸಲಾಗಿದೆ. ಕುಪ್ಪಣ್ಣ ಪಾರ್ಕ್ನ ಒಂದು ಭಾಗದಲ್ಲಿ 20 ಮಳಿಗೆಗಳನ್ನು ನಿರ್ಮಿಸಲು ಎಲ್ಲ ರೀತಿಯ ತಯಾರಿ ನಡೆಯುತ್ತಿದೆ. ತೋಟಗಾರಿಕೆ ಇಲಾಖೆ ವತಿಯಿಂದ ಮಾವು ಬೆಳೆಗಾರರು, ವರ್ತಕರು ಹಾಗೂ ವಿವಿಧ ಇಲಾಖೆ ಅಧಿಕಾರಿಗಳಿಗೆ ಮಾವು ಮಾಗಿಸುವ ಸಂಬಂಧ ತರಬೇತಿ ಕಾರ್ಯಕ್ರಮ ನಡೆಸಲಾಗಿದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಅಂತಿಮವಾಗಿ 3 ದಿನಗಳ ಕಾಲ ಮೇಳ ನಡೆಸಲು ನಿರ್ಧರಿಸಲಾಗಿದೆ.
ಮಾವು ಪ್ರಿಯರ ಆರೋಗ್ಯದ ಹಿತದೃಷ್ಟಿಯಿಂದ ಕ್ಯಾಲ್ಸಿಯಂ ಕಾರ್ಬೈಡ್ ಮುಕ್ತ ನೈಸರ್ಗಿಕವಾಗಿ ಮಾಗಿಸಿದ ಉತ್ಕøಷ್ಟ ದರ್ಜೆಯ ವಿವಿಧ ತಳಿಯ ಹಣ್ಣುಗಳು ಮೇಳದಲ್ಲಿ ಗ್ರಾಹಕರಿಗೆ ದೊರೆಯುವಂತೆ ನೋಡಿಕೊಳ್ಳಲು, ಉತ್ತಮ ಬೆಲೆ ನಿಗದಿ ಮಾಡಲು ಸಭೆಯಲ್ಲಿ ನಿರ್ಧರಿಸಲಾಗಿದೆ. ವಿವಿಧ ಮಾವು, ಹಲಸಿನ ತಳಿಗಳನ್ನು ಮೇಳದಲ್ಲಿ ಪರಿಚಯಿಸಲು ತೀರ್ಮಾನಿಸಲಾಗಿದೆ.
ನೈಸರ್ಗಿಕ ಹಣ್ಣು ಮಾರಾಟ: ಕ್ಯಾಲ್ಸಿಯಂ ಕಾರ್ಬೈಡ್ ರಾಸಾಯನಿಕ ಸಿಂಪಡಿಸಿದ ಹಣ್ಣುಗಳ ಸೇವನೆಯಿಂದ ಕ್ಯಾನ್ಸರ್, ಅಸ್ತಮಾ, ಕೆಮ್ಮು, ನೆಗಡಿ ಮುಂತಾದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳಲಿವೆ. ಮಾರುಕಟ್ಟೆಗೆ ನೈಸರ್ಗಿಕವಾಗಿ ಹಣ್ಣು ಮಾಡಿದ ಹಣ್ಣುಗಳ ಜತೆಗೆ ಕ್ಯಾಲ್ಸಿಯಂ ಕಾರ್ಬೈಡ್ನಿಂದ ಮಾಗಿಸಿದ ಹಣ್ಣುಗಳು ಕೂಡ ದೊಡ್ಡ ಪ್ರಮಾಣದಲ್ಲಿ ಪ್ರವೇಶಿಸಿವೆ. ಕ್ಯಾಲ್ಸಿಯಂ ಕಾರ್ಬೈಡ್ ಬಳಸಿ ಮಾಗಿಸಿದ, ನೈಸರ್ಗಿಕವಾದ ಹಣ್ಣು ಯಾವುದು ಎಂಬ ಗೊಂದಲ ಜನರಲ್ಲಿದೆ. ಹೀಗಾಗಿ, ಮೇಳದಲ್ಲಿ ಇಂತಹ ಗೊಂದಲಗಳಿಗೆ ಅವಕಾಶ ಇಲ್ಲದೆ ನೈಸರ್ಗಿಕವಾಗಿ ಮಾಗಿಸಿದ ಹಣ್ಣುಗಳನ್ನು ಮಾತ್ರ ಮಾರಾಟ ಮಾಡಲು ಅವಕಾಶ ನೀಡಲಾಗುತ್ತದೆ ಎನ್ನುತ್ತಾರೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು.
ಯಾವೆಲ್ಲಾ ಸಿಹಿಯೂಂಟು
ಮೇಳದಲ್ಲಿ ಮಾನಕೂರ, ಆಮ್ಲೆಟ್, ಚೈತ್ರಪೈರಿ, ಸೇಲಂ, ಶಿರಸಿ ಲೋಕಲ್, ರತ್ನಗಿರಿ(ಆಲ್ಫನ್ಸ್), ಬಾದಾಮಿ, ರಸಪುರಿ, ಮಲಗೋವ, ಮಲ್ಲಿಕಾ, ಸೇಂದೂರಾ, ತೋತಾಪುರಿ, ಬಾಗನಪಲ್ಲಿ, ದಶೇರಿ, ಕಾಲಾಪ ಹಾಡ್, ಕೇಶರ್, ಸಕ್ಕರೆ ಗುತ್ತಿ, ಅಮ್ರಪಾಲಿ, ದಿಲ್ಪಸಂದ್ ಸೇರಿ ಹಲವು ತಳಿಯ ಹಣ್ಣುಗಳು ಮೇಳದಲ್ಲಿರÀಲಿವೆ. ಒಂದೊಂದು ಜಾತಿಯ ಮಾವಿಗೂ ಒಂದೊಂದು ಬೆಲೆ ನಿಗದಿ ಮಾಡಲಾಗುತ್ತದೆ. ತೋಟಗಾರಿಕೆ ಇಲಾಖೆಯೂ ಉದ್ಘಾಟನೆ ದಿನವೇ ದರ ನಿಗದಿಪಡಿಸಲಿದೆ.